ಮೇಕೆದಾಟು ಯೋಜನೆ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಬರೆದಿದ್ದ ಪತ್ರಕ್ಕೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಪ್ರತ್ಯುತ್ತರ ನೀಡಿ ಪತ್ರ ಬರೆದಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಲಿ ಎಂದು ಆಶಿಸುವೆ. ಹೀಗಾಗಿ, ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮುಂದುವರಿಸಬೇಡಿ ಎಂದು ಪತ್ರದಲ್ಲಿ ತಮಿಳುನಾಡಿನ ಸಿಎಂ ವಿನಂತಿಸಿದ್ದಾರೆ.
ವಿದ್ಯುತ್ ಉತ್ಪಾದನೆಗೆ ಉನ್ನತ ನ್ಯಾಯಾಲಯ ಅವಕಾಶ ನೀಡಿದ್ದ ಕಾರಣ ಯೋಜನೆ ಕೈಗೆತ್ತಿಕೊಂಡಿದ್ದೇವೆ ಎಂದು ನೀವು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದೀರಿ. 400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲು ಅವಕಾಶವಿದೆ. ಹೀಗಾಗಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದಕ್ಕಾಗಿ ಈ ಯೋಜನೆ ಮುಂದುವರಿಸುವುದಾಗಿ ತಿಳಿಸಿದ್ದೀರಿ. ನಮ್ಮಲ್ಲೂ ನೀರಿಲ್ಲ. ನಾವು ಪ್ರತಿನಿತ್ಯ ನೀರಿಗಾಗಿ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
ಕರ್ನಾಟಕದ ಯೋಜನೆಯಿಂದ ಎರಡೂ ರಾಜ್ಯಕ್ಕೆ ಉಪಯುಕ್ತವಾಗ ಲಿದೆ. ಇದರಿಂದ ತಮಿಳುನಾಡಿನ ರೈತರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಯಡಿಯೂರಪ್ಪ ಬರೆದ ಪತ್ರದಲ್ಲಿ ಹೇಳಲಾಗಿತ್ತು. ಈಗ ಇದಕ್ಕೆ ಪ್ರತಿಯಾಗಿ ಬರೆದಿರುವ ಪತ್ರದಲ್ಲಿ ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಮುಂದುವರಿಸಬೇಡಿ ಎಂದು ಕೇಳಿಕೊಂಡಿದ್ದಾರೆ.