ರಾಜ್ಯದಲ್ಲಿ ಕೊರೊನಾ ವೈರಸ್ ನಿಂದಾಗಿ ಕಳೆದ 4 ತಿಂಗಳನಿಂದ ಮುಚ್ಚಿದ್ದ ಪದವಿ, ಡಿಪ್ಲೋಮಾ , ಎಂಜಿನಿಯರಿಂಗ್ ಕಾಲೇಜುಗಳು ಇಂದಿನಿಂದ ಆರಂಭವಾಗಲಿವೆ.
ಕೊರೋನಾ ವೈರಸ್ ಇಳಿಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಉನ್ನತ ಶಿಕ್ಷಣ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲು ಸಿದ್ದತೆ ಮಾಡಲಾಗಿದೆ.
ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಿ ಕಡ್ಡಾಯವಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ.
ಈಗಾಗಲೇ ಶೇ.74 ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು. ಇಚ್ಛೆ ಇದ್ದರೆ ಮಾತ್ರ ಭೌತಿಕ ತರಗತಿಗಳಿಗೆ ಹಾಜರಾಗಬಹುದು. ಇಲ್ಲವೇ ಆನ್ಲೈನ್ ಮೂಲಕವೂ ಹಾಜರಾಗಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಸೂಚಿಸಲಾಗಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಕಾಲೇಜು ಆಡಳಿತ ಮಂಡಳಿಗಳು ಕಾಲೇಜು ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ ಸಿದ್ಧವಾಗಿದೆ.