ಬಿಜೆಪಿ ಈಗ ಹಳೇ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರವ, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ ಸಮಾವೇಶ ನಡೆಸುತ್ತೇವೆ. ತುರುವೇಕೆರೆಯಲ್ಲಿ ರೈತ ಸಮಾವೇಶವಾದರೆ, ಅಲ್ಲಿಗೆ ಜಿಲ್ಲೆಯ ಎಲ್ಲ ಕಾರ್ಯಕರ್ತರು ಬರಲಿದ್ದಾರೆ. ಮೋರ್ಚಾಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೇಂದ್ರ-ರಾಜ್ಯಗಳ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಹೇಳಿದರು.
ವಿಧಾನಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಪಕ್ಷಕ್ಕೆ ಐತಿಹಾಸಿಕ ಗೆಲುವು ಲಭಿಸಿತ್ತು. ಹಳೆ ಮೈಸೂರು ಭಾಗಕ್ಕೆ ಪಕ್ಷ ಒತ್ತು ಕೊಡುತ್ತಿದೆ. ಫೆ.20ರಂದು ಯುವ ಮೋರ್ಚಾದ ಮೊದಲ ಸಮಾವೇಶವು ಮಂಡ್ಯ ನಗರದಲ್ಲಿ ನಡೆಯಲಿದೆ. ಕೇಂದ್ರದ ನಾಯಕರು ಬರುವ ನಿರೀಕ್ಷೆ ಇದೆ. ಕೇಂದ್ರ ನಾಯಕ ಅಮಿತ್ ಶಾ ಅವರು ಈಗಾಗಲೇ ಮಂಡ್ಯ ಭಾಗಕ್ಕೆ ಬಂದು ಹೋಗಿದ್ದಾರೆ. ಇದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ ಎಂದು ವಿವರಿಸಿದರು.