ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ಚಾಮರಾಜ ಪೇಟೆಯಲ್ಲಿರುವ ಆರ್.ಎಸ್.ಎಸ್.ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಭೂಪೇಂದ್ರ ಯಾದವ್, ಸಂಘದ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ರಹಸ್ಯ ಭೇಟಿ ಕುತೂಹಲ ಮೂಡಿಸಿದೆ.
ಸಚಿವ ಸಂಪುಟ ವಿಸ್ತರಣೆ ಗೊಂದಲ ದಿಂದ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನಾಯಕತ್ವ ಬದಲಾವಣೆ ಕುರಿತು ಪದೇ ಪದೆ ಕೇಳಿ ಬರುತ್ತಿರುವ ವದಂತಿಗಳ ಹಿನ್ನೆಲೆಯಲ್ಲಿ ವಿಸ್ತೃತವಾಗಿ ಆರ್.ಎಸ್.ಎಸ್.ನಾಯಕರ ಜೊತೆ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ ಹೈಕಮಾಂಡ್ಗೆ ಸಲ್ಲಿಕೆ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಯಾರೇ ರಾಜ್ಯಕ್ಕೆ ಆಗಮಿಸಿದರೂ ರಾಜ್ಯ ಬಿಜೆಪಿ ಕಚೇರಿಯಿಂದ ಮಾಹಿತಿ ನೀಡಲಾಗುತ್ತದೆ. ಆದರೆ, ಈ ಬಾರಿ ಬಿಜೆಪಿ ಕಚೇರಿಗೂ ಮಾಹಿತಿ ನೀಡದೇ ಭೂಪೇಂದ್ರ ಯಾದವ್ ನಗರಕ್ಕೆ ಆಗಮಿಸಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.