ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹಕ್ಕಿ ಜ್ವರ ಹರಡದಂತೆ ಎಲ್ಲ ಬಗೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಆತಂಕವಿಲ್ಲ ಎಂದು ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಮಧ್ಯ ಪ್ರದೇಶ ಸೇರಿ ವಿವಿಧ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಪಕ್ಷಿಗಳು ಸಾವಿಗೀಡಾಗುತ್ತಿವೆ. ಮೈಸೂರು ಮೃಗಾಲಯದಲ್ಲಿ ಸಾವಿರಾರು ಪಕ್ಷಿಗಳಿದ್ದು, ಹಕ್ಕಿ ಜ್ವರ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮೃಗಾಲಯದ ವೈದ್ಯರು ಮುಂಜಾಗ್ರತ ಕ್ರಮವಾಗಿ ಎಲ್ಲ ಪಕ್ಷಿಗಳ ಚಲನವಲನ ಬಗ್ಗೆ ನಿಗಾ ಇಟ್ಟಿದ್ದಾರೆ. ಹಾಗೆಯೇ ಕೇಂದ್ರ ಮೃಗಾಲಯ ಪ್ರಾಧಿಕಾರ ಹೊರಡಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ ಎಂದು ತಿಳಿಸಿದರು.
ಪ್ರವಾಸಿಗರಿಂದ ಹಕ್ಕಿಗಳಿಗೆ ಹಾಗೂ ಹಕ್ಕಿಗಳಿಂದ ಪ್ರವಾಸಿಗರಿಗೆ ಹಕ್ಕಿ ಜ್ವರ ಹರಡಬಾರದು ಎಂಬ ಉದ್ದೇಶದಿಂದ ಮೃಗಾಲಯದ ಪ್ರವೇಶ ದ್ವಾರದಲ್ಲಿ ಔಷಧಿ ಸಿಂಪಡಿಸಿರುವ ಫುಟ್ ಮ್ಯಾಟ್ಗಳನ್ನು ಅಳವಡಿಸಲಾಗಿದೆ ಎಂದರು.