ಸಮ್ಮತಿಯಿಂದ ಬೆಳೆಸಿದ ದೈಹಿಕ ಸಂಪರ್ಕ ಅಪರಾಧವೇನಲ್ಲ, ಹಾಗಾಗಿ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ
ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನೂ ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಎಂದರು.
ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ಆದ್ದರಿಂದ ನೈತಿಕ ಹೊಣೆ ಹೊತ್ತು ರಮೇಶ್ ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಯಾವುದೇ ಸಮಸ್ಯೆ ಇದೆ ಅನ್ನಿಸಿಲ್ಲ ಎಂದರು.
ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತೆ. ಹಾಗಾಗಿ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತೆ. ಎಲ್ಲವನ್ನೂ ಎದುರಿಸಲೇಬೇಕು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನೂ ದೂರಲು ಸಾಧ್ಯವಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದರು ಮಾಧುಸ್ವಾಮಿ.
ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರಲಿ. ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ. ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್ನಿಂದ ಯಾರಾದರೂ ಬರುವವರಿದ್ದರೂ ನಾವು ಸ್ವಾಗತಿಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದರು.