ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹಲವು ದಿನಗಳಾಗಿದ್ದರೂ ಕೆಲವು ಕಾರಣಗಳಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿರಲಿಲ್ಲ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿದ ನಂತರ ರಾಜೀನಾಮೆ ಅಂಗೀಕಾರವಾಗುತ್ತದೆ ಎಂಬ ಮಾಹಿತಿ ಇತ್ತು. ಅದರಂತೆ ನಿನ್ನೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ. ಆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಸಿಟಿ ರವಿ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯಪಾಲರಿಗೆ ಕಳುಹಿಸಿದ್ದರು.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಸಚಿವರು ನೀಡುವ ಮೊದಲ ರಾಜೀನಾಮೆ ಪ್ರಕರಣ ಇದಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿ ದ್ದಾಗ ವಿವಾದದ ಹಿನ್ನೆಲೆಯಲ್ಲಿ ಮಂತ್ರಿಗಳು ರಾಜೀನಾಮೆ ನೀಡಿದ್ದರು. ಆದರೆ ಇದೀಗ ಸಿಟಿ ರವಿ ಅವರು ಪಕ್ಷ ಸಂಘಟನೆಗಾಗಿ ಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿದ್ದಾರೆ.