ಜಾತಿ ಸಮೀಕ್ಷೆಯಿಂದ ಸಮಾಜ ವಿಭಜನೆ ಆಗಲ್ಲ

Team Newsnap
2 Min Read
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ

ಮೈಸೂರು: ಜಾತಿ ಗಣತಿಯಿಂದ ಸಮಾಜ ವಿಭಜನೆ ಆಗುವುದಿಲ್ಲ. ಸಮ ಸಮಾಜ ನಿರ್ಮಾಣಕ್ಕೆ ಯಾವ ಜಾತಿಯ ಜನರು ಎಷ್ಟಿದ್ದಾರೆ ಎಂಬ ಅಂಕಿಅಂಶ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ನಗರದ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆ  ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದರು.

ಸಬ್‍ಕ ಸಾಥ್ ಸಬ್‍ಕ ವಿಕಾಸ್ ಎನ್ನುವ ಪ್ರಧಾನಿ ಜಾತಿಗಣತಿಯನ್ನು ವಿರೋಧಿಸುವುದು ಏಕೆ ಎಂದು ಸಿಎಂ ಪ್ರಶ್ನಿಸಿದರು.
ನಮ್ಮದು ಜಾತಿ ವ್ಯವಸ್ಥೆಯ ಸಮಾಜ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶ ಅಗತ್ಯ. ಬಡತನ ನಿವಾರಣೆ ಕಾರ್ಯಕ್ರಮ ರೂಪಿಸಲು ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಗ್ಯಾರಂಟಿ ಯೋಜನೆಗಳಿಗೆ ತೊಂದರೆ ಇಲ್ಲ. ಬರ ಪರಿಹಾರಕ್ಕಾಗಿ 4860 ಕೋಟಿ ರೂ. ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಿದ್ದೇವೆ. ಆದರೆ ಬೆಲೆ ನಷ್ಟವಾಗಿರುವುದು 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ. ಎಲ್ಲಾ ಸೇರಿ ಒಟ್ಟು 3000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ. ಎನ್.ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು.

ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡ ಎಲ್ಲೆಡೆ ಭೇಟಿ ಮಾಡಿ, ಜನರ ಅಹವಾಲು ಕೇಳಬೇಕು. ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು.

ಕೇಂದ್ರ ಬರ ಅಧ್ಯಯನ ತಂಡ ಕಾವೇರಿ ಕಣಿವೆಗೆ ಭೇಟಿ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ನಾವು ತೀರ್ಮಾನಿಸುವುದಿಲ್ಲ. ಕೇಂದ್ರ ತಂಡವೇ ಭೇಟಿ ನೀಡಬೇಕಾದ ಸ್ಥಳಗಳನ್ನು ನಿರ್ಧರಿಸುತ್ತದೆ. ಜಿಲ್ಲೆಗಳನ್ನು ಅವರೇ ಪಟ್ಟಿ ಮಾಡಿಕೊಳ್ಳುತ್ತಾರೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶವಿಲ್ಲ ಎಂದು ಹೇಳಿದ್ದು,
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಡಿಯುವವರನ್ನು ತಡೆಯಲು ಆಗುವುದಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಅಭಿಪ್ರಾಯ ಹೇಳಿದ್ದಾರೆ. ಹೊಸದಾಗಿ ಮದ್ಯದಂಗಡಿ ತೆರೆಯುತ್ತೇವೆ ಎಂದು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯ ಏನಿದೆ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮಹಿಳೆಯರಿಗೆ ‘ಸರ್ಕಾರದ ಶಕ್ತಿ

ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕರಾದ ದರ್ಶನ್ ಧ್ರುವನಾರಾಯಣ್, ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ  ಡಾ. ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ ಇದ್ದರು.

Share This Article
Leave a comment