ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಸೇರಿದಂತೆ ರಾಷ್ಟ್ರ ರಾಜಧಾನಿಯ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರಿಯಾ ತನಿಖಾ ದಳ (ಸಿಬಿಐ) ಶುಕ್ರವಾರ ಬೆಳಗ್ಗೆ ದಾಳಿ ಮಾಡಿ ಶೋಧ ಕಾರ್ಯ ಮುಂದುವರಿಸಿದೆ.
ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ ಸಂಬಂಧ ಸಿಬಿಐ ದಾಳಿ ಮಾಡಿರುವುದಾಗಿ ತಿಳಿದುಬಂದಿದೆ.
ದಾಳಿ ಬಗ್ಗೆ ಸಿಸೊಡಿಯಾ ಟ್ವೀಟ್ ಮಾಡಿದ್ದಾರೆ ಸಿಬಿಐ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕಾರವನ್ನು ನೀಡುತ್ತಿದ್ದೇನೆ. ನನ್ನ ವಿರುದ್ಧ ಇರುವ ಆರೋಪಗಳನ್ನು ಅವರು ಪತ್ತೆ ಮಾಡಲು ಆಗದು ಎಂದಿದ್ದಾರೆ.
ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ. ಶಿಕ್ಷಣ ಕ್ಷೇತ್ರದಲ್ಲಿನ ನನ್ನ ಕೆಲಸವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಸತ್ಯ ಹೊರಬರಲಿದೆ ಎಂದು ಸಿಸೊಡಿಯಾ ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿ, ಸಿಬಿಐ ಅಧಿಕಾರಿಗಳನ್ನು ಸ್ವಾಗತಿಸುತ್ತೇನೆ. ಈ ಹಿಂದಿನ ದಾಳಿಯಲ್ಲಿ ತನಿಖಾ ಸಂಸ್ಥೆ ಅಧಿಕಾರಿಗಳು ಏನನ್ನೂ ಕಂಡುಕೊಂಡಿಲ್ಲ ಮತ್ತು ಈ ಬಾರಿಯೂ ಸಹ ಏನು ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಪ್ರಥಮ ಮಾಹಿತಿ ವರದಿ ಅಥವಾ ಎಫ್ಐಆರ್ ದಾಖಲಿಸಿದೆ.