ಜನಪರ ಸೇವೆಗಳಿಗೆ ಸುತ್ತೂರು ಮಠ ಮಾದರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Team Newsnap
1 Min Read

ನಾಡಿನಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗಲೆಲ್ಲ ಶ್ರೀಮಠ ನೇರವಿನ ಹಸ್ತ ಚಾಚಿದೆ. ಕೋರೊನ ಲಾಕ್‌ಡೌನ್ ಸಂದರ್ಭದಲ್ಲೂ ಶ್ರೀಮಠ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಿದೆ. ತ್ರಿವಿಧ ದಾಸೋಹಗಳ ಮೂಲಕ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಶ್ರೀ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ೧೦೬೧ನೆಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಹಾಸಂಸ್ಥಾನ ಸ್ಥಾಪಿಸಿದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಶ್ರೇಷ್ಠ ಸಂತರಲ್ಲಿ ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.

ಶತಮಾನಗಳಿಂದ ಮಠದ ಪರಂಪರೆಯಿಂದ ಬಂದ ಎಲ್ಲಾ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಅಭ್ಯುದಯಕ್ಕೆ ತಮ್ಮದೇ ಆದ ಭವ್ಯ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದರು.

ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಮಠಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳು ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಬದುಕಿನಲ್ಲಿ ನೀಡಿರುವ ಕೊಡುಗೆ ಅನನ್ಯವಾದದ್ದು. ಸುತ್ತೂರು ಮಠವು ಇತರೆ ಮಠಗಳಿಗೆ ಮಾದರಿಯಾಗಿದೆ. ಮಠದ ಜನಪರ ಚಟುವಟಿಕೆಗಳಿಗಾಗಿ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರದ ಎಸ್.ಟಿ.ಸೋಮಶೇಖರ್, ಪೌರಾಡಳಿತ ಸಚಿವ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ನಿರಂಜನ್ ಕುಮಾರ್, ತನ್ವೀರ್ ಸೇಠ್, ಎನ್.ಮಹೇಶ್, ಎನ್. ಅಶ್ವಿನ್ ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ.ರಾಜೀವ್, ಚಿತ್ರ ನಟ ದೊಡ್ಡಣ್ಣ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು.

Share This Article
Leave a comment