ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಸಚಿವ ನಾರಾಯಣಗೌಡ

Team Newsnap
2 Min Read

ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದೆ, ಅರ್ಥಪೂರ್ಣ ದಸರಾ ಆಚರಣೆಗೆ ಕ್ರಮವಹಿಸಿ ಎಂದು ರೇಷ್ಮೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವ 2021ರ ಆಚರಣೆ ಸಂಬಂಧ ನಡೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಅಕ್ಟೊಬರ್ 9 ರಂದು ಜಂಬೂಸವಾರಿ ನಡೆಯಲಿದೆ ಅಂಬಾರಿ ಆನೆತರಲು ಅರಣ್ಯ ಇಲಾಖೆ, ಪಶುಸಂಗೋಪನ ಇಲಾಖೆಯೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು ಎಂದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆವತಿಯಿಂದ ಫಿಟ್ ಇಂಡಿಯಾ, ಕಬ್ಬಡ್ಡಿ, ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸಿ ಎಂದರು.

ಮಂಡ್ಯ ಜಿಲ್ಲೆಯ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಹಾಗೂ ಕವಿಗೋಷ್ಟಿಗಳ ಮೂಲಕ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹೇಳಿದರು.

ದೀಪಾಲಂಕಾರ :

ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರದ ವ್ಯವಸ್ಥೆ ಮಾಡಿ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಕರೋನಾ ಕಠಿಣ ಸಂದರ್ಭದಲ್ಲಿ ಸೇವೆ ನೀಡಿದವರನ್ನು ಗುರುತಿಸಿ ಸನ್ಮಾನಿಸಿ ಎಂದರು.

ಬೋಟಿಂಗ್ ವ್ಯವಸ್ಥೆ :

ಪಾಂಡವಪುರದ ಕೆರೆತೊಣ್ಣುರು, ಕೆ,ಆರ್ ಎಸ್ ನ ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಿ ಹಾಗೂ ಜಲಕ್ರೀಡೆಗಳನ್ನು ಆಯೋಜಿಸಿ ಎಂದರು.

ದಸರಾ ಪ್ರಯುಕ್ತ ಪ್ರವಾಸಿ ತಾಣಗಳ ಶುಚಿತ್ವ, ಬನ್ನಿಮಂಟಪ ಜಂಬೂಸವಾರಿ ಹೊರಡುವ ರಾಜಬೀದಿಗಳ ಶುಚಿತ್ವ ಬಗ್ಗೆ ಕ್ರಮವಹಿಸಿ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯದ ಜಾಗೃತಿ ಮೂಡಿಸುವ ವಸ್ತುಪ್ರದರ್ಶನ ಹಾಗೂ ಕೋವಿಡ್ 3 ನೇ ಅಲೆಯ ಬಗ್ಗೆ , ಮಾಸ್ಕ್ ಧರಿಸುವಿಕೆ, ಸ್ಯಾನಿಟೈಜರ್ , ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್ ಅಶ್ವತಿ, ಜಿ.ಪಂ ಸಿಇಒ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿಯ ಸಂಸ್ಥಾಪಕರಾದ ಡಾ.ಭಾನುಪ್ರಕಾಶ್ ಉಪಸ್ಥಿತರಿದ್ದರು.

Share This Article
Leave a comment