ರಾಸಲೀಲೆ ಸಿಡಿ ಪ್ರಕರಣದಲ್ಲಿ ಎಸ್ಐಟಿ ತನಿಖೆಯನ್ನು ಎದುರಿಸಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಏಪ್ರಿಲ್ 1 ರಂದು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದ ರಮೇಶ್ ಜಾರಕಿಹೊಳಿಗೆ ಕೊರೋನಾ ಸೋಂಕು ತಗುಲಿರುವುದಾಗಿ ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೂ ಮುನ್ನ ಸಚಿವ ಭೈರತಿ ಬಸವರಾಜು ಬೆಳಗಾವಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಇದೆ ಎಂದು ಗೊತ್ತಾಗಿದೆ ಎಂದಿದ್ದರು.
ಈ ಕಾರಣಕ್ಕಾಗಿ ಜಾರಕಿಹೊಳಿ ಉಪ ಚುನಾವಣೆಯ ಪ್ರಚಾರಕ್ಕೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದರು.
ಎಸ್ಐಟಿ ವಿಚಾರಣೆಗೂ ಮಿಸ್ ? :
ಅನಾರೋಗ್ಯ ನೆಪವೊಡ್ಡಿ ಎಸ್ ಐಟಿ ವಿಚಾರಣೆಯಿಂದಲೂ ತಪ್ಪಿಸಿಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು.
ಆದರೆ, ಇದೀಗ ಕೊರೊನಾ ದೃಢಪಟ್ಟಿರುವುದರಿಂದ ಕೆಲದಿನಗಳ ಕಾಲ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಕಾಣಿಸಿಕೊಳ್ಳುವುದು ಕಷ್ಟವಾಗಲಿದೆ.