ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನು ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ.
ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಅ. 17ರಂದು ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭದಲ್ಲಿ ಗರಿಷ್ಠ 200 ಮಂದಿ ಮಾತ್ರ ಪಾಲ್ಗೊಳ್ಳಬಹುದು ಎಂದು ತಿಳಿಸಲಾಗಿದೆ. ಒಟ್ಟಾರೆ, ಸಾರ್ವಜನಿಕರಿಗೆ ಈ ಬಾರಿ ದಸರಾವನ್ನು ನೇರವಾಗಿ ವೀಕ್ಷಿಸದಂತೆ ನಿರ್ಬಂಧಿಸಲಾಗಿದೆ.
ಕರ್ತವ್ಯನಿರತ ಸಿಬ್ಬಂದಿ, ಕಲಾವಿದರು ಮತ್ತು ಮಾಧ್ಯಮದವರೂ ಒಳಗೊಂಡಂತೆ 200ಕ್ಕೂ ಹೆಚ್ಚು ಜನರು ಉದ್ಘಾಟನಾ ಕಾರ್ಯಕ್ರಮದಲ್ಲಿ ಇರಬಾರದು ಎಂದು ಸೂಚಿಸಲಾಗಿದೆ.
*ಅಕ್ಟೋಬರ್ 26ರಂದು ನಡೆಯುವ ಜಂಬೂ ಸವಾರಿಯಲ್ಲಿ 300ಕ್ಕಿಂತ ಹೆಚ್ಚು ಮಂದಿಗೆ ಪ್ರವೇಶ ನೀಡುವಂತಿಲ್ಲ.
*ದಸರಾ ಆಚರಣೆಯಲ್ಲಿ ಭಾಗವಹಿಸುವಕರ್ತವ್ಯನಿರತ ಸಿಬ್ಬಂದಿ, ಮಾಧ್ಯಮ ಮೊದಲಾದ ಪ್ರತಿಯೊಬ್ಬರೂ ಕೂಡ ಅ. 14ರ ನಂತರ ಆರ್ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗಟಿವ್ ಇರುವ ದಾಖಲಾತಿಯನ್ನು ಕಡ್ಡಾಯವಾಗಿ ತಂದಿರಬೇಕು.
*ದೈಹಿಕ ಅಂತರ, ಮುಖಗವಸು ಇತ್ಯಾದಿ ಕೋವಿಡ್ ನಿರ್ದೇಶನ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕ್ರಮ ಜರುಗಿಸಬೇಕು.
*ಮೈಸೂರಿನ ದಸರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನ ದೃಶ್ಯ ಸಂವಹನ (ವರ್ಚುವಲ್) ಮೂಲಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು