ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಂದು ಪ್ರಶ್ನೆ ಮಾಡಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮತ್ತೆ ವಿವಾದ ಹೇಳಿಕೆಯೊಂದನ್ನು ಟ್ವಿಟ್ ಮಾಡಿದ್ದಾರೆ.
ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿ, ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಅದಕ್ಕಿಂತ ಮುಖ್ಯವಾಗಿ, ಕೌರವರು ಯಾರು? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಮುರ್ಮು ಅವರ ಬಗ್ಗೆ ನಿರ್ದೇಶಕರು ಟ್ವಿಟರ್ ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಜಿ ನಾರಾಯಣ ರೆಡ್ಡಿ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಬಿಡ್ಸ್ ಪೊಲೀಸ್ ಇನ್ಸ್ ಪೆಕ್ಟರ್ ಬಿ ಪ್ರಸಾದ ರಾವ್ ಈ ಬಗ್ಗೆ ಮಾಹಿತಿ ನೀಡಿ, ‘ನಾವು ದೂರನ್ನು ಸ್ವೀಕರಿಸಿದ್ದೇವೆ ಮತ್ತು ಅದನ್ನು ಕಾನೂನು ಅಭಿಪ್ರಾಯಕ್ಕಾಗಿ ಕಳುಹಿಸಿದ್ದೇವೆ. ಕಾನೂನು ಅಭಿಪ್ರಾಯವನ್ನು ಪಡೆದ ನಂತರ, ನಾವು ವರ್ಮಾ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂದು ಹೇಳಿದ್ದಾರೆ.