ಸಿವಿಲ್ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಐಪಿಎಸ್ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಿದ ಸಿಎಂ ನಂತರ ವರದಿಗಾರರೊಂದಿಗೆ ಮಾತನಾಡಿದರು. ಯಾವುದೇ ಮಾಫಿಯಾ ಜತೆ ಸಂಬಂಧವನ್ನು ಪೊಲೀಸರು ಇಟ್ಟುಕೊಳ್ಳಬಾರದೆಂದು ತಿಳಿಸಲಾಗಿದೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಲು ಅವಶ್ಯಕ ಕ್ರಮ ತೆಗೆದುಕೊಳ್ಳುವಂತೆ, ಸಾರ್ವಜನಿಕರೊಂದಿಗೆ ಪೊಲೀಸರು ಸೌಜನ್ಯದಿಂದ ಇರುವಂತೆ ಸೂಚಿಸಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ನುಡಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶರು, ಪೊಲೀಸ್ ಆಯುಕ್ತರು ಹಾಗೂ ಎಲ್ಲ ಜಿಲ್ಲಾ ಎಸ್ಪಿಗಳು ನಿರಂತರವಾಗಿ ಪ್ರಕರಣಗಳ ಮೇಲ್ವಿಚಾರಣೆ ನಡೆಸಬೇಕು. ಈ ಉದ್ದೇಶಕ್ಕೆ ಪ್ರತ್ಯೇಕ ಡ್ಯಾಶ್ಬೋರ್ಡ್ ರೂಪಿಸುವಂತೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.
ಅಪರಾಧ ಪ್ರಕರಣಗಳ ವಿಚಾರಣೆಯಲ್ಲಿ ಹಿನ್ನಡೆ ಆಗದಂತೆ ಎಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ತಿಳಿಹೇಳಿರುವುದಾಗಿ ಹೇಳಿದರು.