2 ನೇ ಹಂತದ ಲಸಿಕೆ ಕಾರ್ಯಕ್ರಮ: ಲಸಿಕೆ ಪಡೆದುಕೊಂಡೇ ಚಾಲನೆ ನೀಡಿದ ಡಿಸಿ

Team Newsnap
1 Min Read

ರಾಮನಗರ ಜಿಲ್ಲೆಯಲ್ಲಿ ಫ್ರಂಟ್‌ಲೈನ್ ವಾರಿಯರ್ಸ್‌ ಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಾವೇ ಲಸಿಕೆ ಪಡೆಯುವ ಮೂಲಕ ೨ ನೇ
ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಸರ್ಕಾರ ಫ್ರಂಟ್‌ಲೈನ್ ವಾರಿಯರ್ಸ್‌ ಗೆ ಲಸಿಕೆಯನ್ನು ನೀಡುತ್ತಿದ್ದು, ನೊಂದಣಿ ಮಾಡಿಕೊಂಡಿರುವ ಪ್ರತಿಯೊಬ್ಬರು ತಪ್ಪದೇ ಲಸಿಕೆ ಪಡೆದುಕೊಳ್ಳಿ ಇದೇ ವೇಳೆ ಕರೆ ನೀಡಿದರು.

ಲಸಿಕೆ ಪಡೆಯುವುದು ಸುಲಭ:

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕ್ರಂ ಕೋವಿಶೀಲ್ಡ್ ಲಸಿಕೆ ಪಡೆದ ನಂತರ ಮಾತನಾಡಿ ನೊಂದಣಿ ಮಾಡಿಕೊಂಡವರು ಲಸಿಕೆ ನೀಡುವ ಸೈಟ್‌ಗೆ ಆಗಮಿಸಿದರೆ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿ ೨ ನಿಮಿಷದಲ್ಲಿ ಲಸಿಕೆ ನೀಡಲಾಗುವುದು. ನಂತರ ಅರ್ಧ ಗಂಟೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸುವರು . ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಖಾತ್ರಿ ಪಡಿಸಿಕೊಂಡ ನಂತರ ಕಳುಹಿಸಿಕೊಡುತ್ತಾರೆ.

ಕೋವಿಡ್-೧೯ ಸಂಕ್ರಾಮಿಕ ರೋಗದಿಂದ ಉಂಟಾದ ತೊಂದರೆಗಳ ಬಗ್ಗೆ ಪ್ರತಿಯೊಬ್ಬರಿಗೆ ತಿಳಿದಿದೆ. ಈಗಾಗಲೇ ಮೊದಲ ಹಂತದಲ್ಲಿ ೧,೮೦,೦೦೦ ಕ್ಕೂ ಹೆಚ್ಚಿನ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದುಕೊಂಡಿದ್ದಾರೆ. ಯಾರಿಗೂ ಸಹ ತೊಂದರೆಯಾಗಿಲ್ಲ. ಎಲ್ಲರೂ ಲಸಿಕೆ ಪಡೆದು ಕೋವಿಡ್-೧೯ ಸಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಕರಿಸಬೇಕು ಎಂದು ತಮ್ಮ ಅನುಭವ ಹಂಚಿಕೊಂಡರು.

ಲಸಿಕೆ ನೀಡುವ ವೇಳೆ ಅಪರ ಜಿಲ್ಲಾಧಿಕಾರಿ ಟಿ ಜವರೇಗೌಡ ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್. ಅಧಿಕಾರಿ ಡಾ: ಪದ್ಮ, ರಾಮನಗರ ತಾಲ್ಲೂಕು ವೈದ್ಯಾಧಿಕಾರಿ ಡಾ: ಶಶಿಕಲಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment