ಮಂಡ್ಯದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿ, ನೂರಾರು ಎಕರೆ ಬೆಳೆ ನಾಶವಾಗಿದೆ. ಈ ನಡುವೆ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಮಂಡ್ಯದ ಸಾಹುಕಾರ್ ಚನ್ನಯ್ಯ ಬಡಾವಣೆಯಲ್ಲಿ ನಡೆದಿದೆ.
ಪಾರ್ವತಿ ಬಾಯಿ (75) ಮೃತ ವೃದ್ಧೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮನೆಯ ಗೋಡೆ ಶಿಥಿಲಗೊಂಡಿದೆ. ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಇದ್ದ ಪಾರ್ವತಿ ಬಾಯಿ ಮೇಲೆ ಗೋಡೆ ಕುಸಿದು ಬಿದ್ದಿದೆ. ಇದರ ಪರಿಣಾಮ ಗೋಡೆಯ ಅವಶೇಷಗಳ ಕೆಳಗೆ ಸಿಲುಕಿ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ತಾಲೂಕಿನ ಗಂಟೇಗೌಡಹಳ್ಳಿ, ಗುಡುಗೇನಹಳ್ಳಿ, ಉಪ್ಪರಕನಹಳ್ಳಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ಹಳ್ಳ ಕೊಳ್ಳ ಉಕ್ಕಿ ಹರಿದು ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶವಾಗಿವೆ.
ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸೇರಿದಂತೆ ಹಲವು ಕಡೆ ಮಳೆ ಅದ್ವಾನ ಸೃಷ್ಟಿಸಿಯಾಗಿದೆ.