- ದೇಶದ 13 ವಿಮಾನ ನಿಲ್ದಾಣ ಮಾರಾಟಕ್ಕೆ ಸಿದ್ಧತೆ
- 2.5 ಲಕ್ಷ ಕೋಟಿ ರೂ. ಸಂಗ್ರಹಣೆಯ ಗುರಿ
ಬೆಂಗಳೂರು ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳಲ್ಲಿರುವ ತನ್ನ ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ರೆಡಿಯಾಗಿದೆ.
ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿನ ತನ್ನ ಉಳಿಕೆ ಪಾಲಿನ ಷೇರನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
2021-22ರ ಹಣಕಾಸು ವರ್ಷದಲ್ಲಿ ಆಸ್ತಿಗಳ ನಗದೀಕರಣದ ಮೂಲಕ 2.5 ಲಕ್ಷ ಕೋಟಿ ರೂ. ಸಂಗ್ರಹಣೆ ಸಂಬಂಧ ತನ್ನ ಪಾಲನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಶೇ.13 ಹಾಗೂ ದೆಹಲಿ ವಿಮಾನ ನಿಲ್ದಾಣದಲ್ಲಿ ಶೇ.26ರಷ್ಟು ಷೇರನ್ನು ಹೊಂದಿದೆ. ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಗಳನ್ನು ಈಗಾಗಲೇ ಸಚಿವಾಲಯ ಆರಂಭಿಸಿದೆ, ಸಂಪುಟದ ಅಂಗೀಕಾರ, ವಿವಿಧ ಇಲಾಖೆಗಳ ಅನುಮೋದನೆ ಪಡೆಯುವ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ.
ಕಳೆದ ವರ್ಷ ನಡೆದ ಮೊದಲ ಹಂತದ ಖಾಸಗೀಕರಣದಲ್ಲಿ ಮಂಗಳೂರು, ಲಕ್ನೋ, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರ ಸೇರಿ 6 ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಮಾರಾಟ ಮಾಡಲಾಗಿತ್ತು ಎಂಬುದನ್ನು ಸ್ಮರಿಸಬಹುದು.
ಮುಂಬೈ ವಿಮಾನ ನಿಲ್ದಾಣದಲ್ಲಿ ಶೇ.74ರಷ್ಟು ಷೇರು ಅದಾನಿ ಗ್ರೂಪ್ನಲ್ಲಿ ಇದ್ದರೆ ಶೇ.26ರಷ್ಟು ಷೇರು ಎಎಐನಲ್ಲಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಶೇ.54ರಷ್ಟು ಷೇರು ಜಿಎಂಆರ್ ಗ್ರೂಪ್, ಎಎಎ ಬಳಿ ಶೇ. 26 ಮತ್ತು ಫ್ರಾಪೋರ್ಟ್ ಎಜಿ ಮತ್ತು ಎರ್ಮಾನ್ ಮಲೇಷ್ಯಾ ಶೇ.10 ರಷ್ಟು ಪಾಲನ್ನು ಹೊಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಬಳಿ ಇರುವ ಆಸ್ತಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುವುದು ಎಂದು ಹೇಳಿದ್ದರು.