ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ : ವೇಳಾಪಟ್ಟಿ ಪ್ರಕಟ – ಜೂ 13 ಮತದಾನ

Team Newsnap
2 Min Read
Election to Tripura Legislative Assembly today - 13 percent voting ತ್ರಿಪುರಾ ವಿಧಾನ ಸಭೆಗೆ ಇಂದು ಚುನಾವಣೆ - ಶೇ 13 ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಬಗ್ಗೆ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.

ವೇಳಾ ಪಟ್ಟಿ ಹೀಗಿದೆ

  • ಮೇ 19ರಂದು ಅಧಿಸೂಚನೆ ಪ್ರಕಟ
  • ನಾಮಪತ್ರ ಸಲ್ಲಿಸಲು ಮೇ 26 ಕೊನೆಯ ದಿನವಾಗಿದೆ.
  • ನಾಮಪತ್ರಗಳ ಪರಿಶೀಲನೆಯನ್ನು ಮೇ 27ರಂದು
  • ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 30 ಕಡೆಯ ದಿನವಾಗಿದೆ.
  • ಮತದಾನ ಜೂನ್ 13 – ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ
  • ಜೂನ್ 15ರಂದು ಮತಗಳ ಎಣಿಕೆ ಕಾರ್ಯ
  • ಚುನಾವಣಾ ಪ್ರಕ್ರಿಯೆ ಜೂನ್ 17ರಂದು ಅಂತ್ಯ

ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾ ಅಧಿಕಾರಿಯಾಗಿ ನೇಮಕ, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ ವ್ಯಾಪ್ತಿಗೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡಲಿವೆ.

ಚುನಾವಣೆ ಸ್ಪರ್ಧೆಯ ನಿಯಮಗಳು

ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30ಕ್ಕೂ ಕಡಿಮೆ ಇರಬಾರದು. ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು.
ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ನಾಮಪತ್ರದೊಂದಿಗೆ ಮತದಾರರಾಗಿರುವ ಬಗ್ಗೆ ಸಂಬಂಧಿಸಿದ ಮತದಾರ ನೊಂದಣಾಧಿಕಾರಿ/ಸಹಾಯಕ ನೊಂದಣಾಧಿಕಾರಿಗಳಿಂದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಲಗತ್ತಿಸಬೇಕು. ಸದರಿ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಪಟ್ಟ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನೊಂದಾಯಿತರಾಗಿರುವವರು ಮಾತ್ರ ಮತದಾರರಾಗಿರುತ್ತಾರೆ.

ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 19 ರಿಂದ 26ರವರೆಗೆ ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸಲು ಬೇಕಾದ ನಮೂನೆಗಳನ್ನು ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಡೆಯಬಹುದು.

ಇದನ್ನು ಓದಿ :ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂನ್ 10 ರಂದು ಮತದಾನ – ಅಂದೇ ಫಲಿತಾಂಶ

ಮೇ 22ರಂದು ಭಾನುವಾರ ನೆಗೋಷಿಯಬಲ್ ಇನ್ಸ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಅಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ. ಈ ಚುನಾವಣೆಯಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ಚುನಾವಣೆಗೆ ಸ್ಪರ್ಧಿಸಲಿಚ್ಚಿಸುವವರು ಗಮನಿಸಬೇಕಾದ ಒಂದು ಮುಖ್ಯ ಅಂಶವೆಂದರೆ 1951ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 33ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿ ನಾಮನಿರ್ದೇಶನ ಪತ್ರದಲ್ಲಿ ಕನಿಷ್ಠ ಹತ್ತು ಮತದಾರರು ಸೂಚಕರಾಗಿ ಸಹಿ ಮಾಡಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು 5 ಸಾವಿರ ರೂ., ಇತರೆ ಅಭ್ಯರ್ಥಿ 10 ಸಾವಿರ ರೂ. ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.

ಅಭ್ಯರ್ಥಿಗಳು ನಿಗದಿತ ನಮೂನೆ (ಫಾರಂ 26 ಮತ್ತು ಅನುಬಂಧ-1ರಲ್ಲಿ) ಗಳಲ್ಲಿ ಪ್ರಮಾಣಪತ್ರವನ್ನು ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಡಾ. ಜಿ.ಸಿ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a comment