ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ ಎಂದು ರೇಷ್ಮೆ ಮತ್ತು ಕ್ರೀಡಾ ಸಚವ ನಾರಾಯಣಗೌಡ ತಿಳಿಸಿದರು.
ಕೇಂದ್ರ ಸಚಿವರನ್ನು ಭೇಟಿ ಮಾಡಿದ ವೇಳೆ ನಾರಾಯಣಗೌಡ, ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ರಸ್ತೆ ಹೆದ್ದಾರಿ ಕಾಮಗಾರಿ ಕುರಿತು ಚರ್ಚಿಸಿದರು.
ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ-ಅರಸೀಕೆರೆ ರಸ್ತೆಯು ಶಿವಮೊಗ್ಗ ಮತ್ತು ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ ಮತ್ತು ಪ್ರತಿದಿನ ಸಾವಿರಾರು ಪ್ರಯಾಣಿಕರು ಈ ರಸ್ತೆಯನ್ನು ಬಳಸುತ್ತಾರೆ. ಹೀಗಾಗಿ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಮನವಿ ಮಾಡಲಾಗಿದೆ.
ಈ ರಸ್ತೆಯನ್ನು ಮೇಲ್ದರ್ಜೆಗೇರಿಸುವುದರಿಂದ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ ಎಂದು ನಾರಾಯಣಗೌಡರು ಕೇಂದ್ರ ಸಚಿವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ.
ಭಾರತ್. ಮಾಲಾ-II ಅಡಿಯಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ಗಡ್ಕರಿ ಭರವಸೆ ನೀಡಿದರು ಎಂದು ವಿವರಿಸಿದರು.