ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ಬುಧವಾರ ಕುವೆಂಪು ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಇಲ್ಲ, ದಿನಪತ್ರಿಕೆಗಳು ಬರುತ್ತಿಲ್ಲ, ಊಟದ ವ್ಯವಸ್ಥೆ ಕೂಡ ಸರಿಯಿಲ್ಲ. ಕೊರೆಯುವ ಚಳಿಯಲ್ಲೂ ತಣ್ಣೀರಿನ ಸ್ನಾನ ಮಾಡಬೇಕಿದೆ, ಕೂಡಲೇ ಬಿಸಿ ನೀರಿಗಾಗಿ ಸೋಲಾರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಕೋವಿಡ್ ಸಂದರ್ಭದಲ್ಲಿ ಒಂದೆ ಕಡೆ ಎಲ್ಲ ವಿದ್ಯಾರ್ಥಿಗಳಿಗೆ ಊಟ ನೀಡಲಾಗುತ್ತಿದೆ. ಊಟಕ್ಕಾಗಿ ಗುಂಪುಗುಂಪಾಗಿ ಸೇರಿ ಊಟ ಪಡಯಬೇಕಾದ ಅನಿವಾರ್ಯತೆ ಎದುರಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ವಿವಿ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುಲಸಚಿವ ಆರ್.ಶಿವಪ್ಪ ಅವರು, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.