ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳ ತಂಡವೊಂದು ಗುರುವಾರ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ.
ಛಲವಾದಿಪಾಳ್ಯದ 138ನೇ ವಾರ್ಡ್ನ ಸದಸ್ಯೆಯಾಗಿದ್ದ ರೇಖಾ ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು.
ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ನಲ್ಲಿ ಇಂದು ಬೆಳಿಗ್ಗೆ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಕರೆದ ದುಷ್ಕರ್ಮಿಗಳು, ಮನೆ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ರೇಖಾರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ರೇಖಾ ಬದುಕಲಿಲ್ಲ.
ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಹಚರರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.