ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಮೂಲಕ ರಾಜ್ಯದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳ್ಳಲಿದೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ನೀಡಿದ್ದಾರೆ.
ದಾವೋಸ್ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲಿನ ಸುಂಕ ಕಡಿತಗೊಳಿಸಿದಾಗ ರಾಜ್ಯ ಸರ್ಕಾರ ತೆರಿಗೆ ಕಡಿತಗೊಳಿಸಿತ್ತು. ಹಾಗಾಗಿ ಈ ಬಾರಿಯೂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಆಶ್ವಾಸನೆ ನೀಡಿದರು.
ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ಗೆ ತೆರಳುತ್ತಿದ್ದು, ನಾಳೆ ಮತ್ತು 24ರಂದು ನಡೆಯಲಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗಿಯಾಗುತ್ತೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗುವೆ. ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.