ರಾಜ್ಯದಲ್ಲಿ ಸದ್ಯಕ್ಕೆ ಯೂರಿಯಾ ಗೊಬ್ಬರದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೊರತೆ ಇರುವ ಗೊಬ್ಬರ ಪೂರೈಸಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿದ ಬಳಿಕ ತಿಳಿಸಿದರು.
ರಾಜ್ಯದಲ್ಲಿ ಹಿಂಗಾರು ಹಂಗಾಮಿಗೆ 32,000 ಟನ್ ಡಿ-ಅಮೋನಿಯಾ ಫಾಸ್ಫೇಟ್ (ಡಿಎಪಿ) ಗೊಬ್ಬರ ಪೂರೈಸುವಂತೆ ಮನವಿ ಸಲ್ಲಿಸಲಾಗಿದೆ. ಹಾಗೆಯೇ 10,000 ಟನ್ ಪೊಟ್ಯಾಷ್ ಗೊಬ್ಬರವನ್ನು ಪೂರೈಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಬೊಮ್ಮಾಯಿ ನುಡಿದರು.
ಬರುವ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಶೇ. 90 ರಷ್ಟು ಜನರಿಗೆ ಮೊದಲ ಹಂತದ ಕೊರೊನಾ ಲಸಿಕೆ ಮತ್ತು ಶೇ.70 ರಷ್ಟು ಜನರಿಗೆ 2 ನೇ ಹಂತದ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ರಸ್ತುತ ನಮ್ಮಲ್ಲಿ 51 ಲಕ್ಷ ಡೋಸ್ ಲಸಿಕೆ ಸಂಗ್ರಹ ಇದೆ.
ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಿರುವುದಕ್ಕೆ ಕೇಂದ್ರ ಸಚಿವರು ಅಭಿನಂದಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಇದ್ದರು