ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕಾಫಿ ತೋಟದ ಇಬ್ಬರು ಕೆಲಸಗಾರರು ಸ್ಥಳದಲ್ಲೇ ಸಾವಿಗೀಡಾಗಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ(60), ಚಿಕ್ಕಯ್ಯ(50) ಕಾಡಾನೆ ದಾಳಿಗೆ ಬಲಿಯಾದ ಮೃತ ದುರ್ದೈವಿಗಳು.
ಕಾಫಿ ತೋಟದಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕೆಲಸಗಾರರ ಮೇಲೆ ದಾಳಿ ಮಾಡಿರುವ ಕಾಡಾನೆ ಸೊಂಡಲಿನಿಂದ ತಿವಿದು, ತುಳಿದ ಕಾರಣ ಇಬ್ಬರು ಸ್ಥಳದಲ್ಲೇ ಪ್ರಾಣತೆತ್ತಿದ್ದಾರೆ.
ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಕಾರಣ ನೂರಾರು ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಸಚಿವರು, ಶಾಸಕರು ಬರುವವರೆಗೂ ಶವಗಳನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಅರೇ ಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.